For the best experience, open
https://m.justkannada.in
on your mobile browser.

ರಸ್ತೆ ಗುಂಡಿಗಳನ್ನ ಮುಚ್ಚಿ, ವಿಳಂಬ ಕಾಮಗಾರಿಗಳ ತ್ವರಿತಗೊಳಿಸಿ:  ಪರಸ್ಪರ ಸಹಯೋಗದಿಂದ ಕೆಲಸ ಮಾಡಿ- ಸಿಎಂ ಸಿದ್ದರಾಮಯ್ಯ ಸೂಚನೆ

06:04 PM May 22, 2024 IST | prashanth
ರಸ್ತೆ ಗುಂಡಿಗಳನ್ನ ಮುಚ್ಚಿ  ವಿಳಂಬ ಕಾಮಗಾರಿಗಳ ತ್ವರಿತಗೊಳಿಸಿ   ಪರಸ್ಪರ ಸಹಯೋಗದಿಂದ ಕೆಲಸ ಮಾಡಿ  ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,22,2024 (www.justkannada.in): ಬೆಂಗಳೂರು ಸಿಟಿ ರೌಂಡ್ಸ್ ಹಾಕಿ ಮಳೆ ಹಾನಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ರಸ್ತೆ ಗುಂಡಿಗಳನ್ನ ಮುಚ್ಚಿ, ವಿಳಂಬ ಕಾಮಗಾರಿಗಳ ತ್ವರಿತಗೊಳಿಸಿ. BBMP, BWSSB, BDA, Bescom ಪರಸ್ಪರ ಸಹಯೋಗದಿಂದ ಕೆಲಸ ನಡೆಸಬೇಕು ಎಂದು ಸೂಚನೆ ನೀಡಿದರು.

ಇಂದು ಬೆಂಗಳೂರು ನಗರ ಸಂಚಾರ ಕೈಗೊಂಡು ಮಳೆ ಹಾನಿ  ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ರಾಮಲಿಂಗಾರೆಡ್ಡಿ ಬಿಡಿಎ ಅಧ್ಯಕ್ಷರು, ಆಯುಕ್ತರು ಸೇರಿ ಅಧಿಕಾರಿಗಳ ತಂಡದ ಜೊತೆ ಅನೇಕ ಪ್ರದೇಶಗಳಿಗೆ ಭೇಟಿ ನೀಡಿದೆವು. ಜೂನ್ ತಿಂಗಳಿನಿಂದ  ಮುಂಗಾರು ಪ್ರಾರಂಭವಾಗಲಿದೆ. ವಾಡಿಕೆ ಮಳೆಗಿಂತ  ಹೆಚ್ಚು ಮಳೆಯಾಗಿ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಗಾಳಿ ಆಂಜನೇಯ ದೇವಾಲಯದ ಬಳಿ ಮಳೆ ಜಾಸ್ತಿಯಾದಾಗ ನೀರು ಹರಿಯಲು ಎತ್ತರ ಸಾಲಲ್ಲ, ಹೂಳು ತುಂಬಿತ್ತು. ಪರ್ಯಾಯವಾಗಿ ಇನ್ನೊಂದು ಮೋರಿ ನಿರ್ಮಿಸಲು ಸೂಚನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 860 ಕಿಮೀ ರಾಜಕಾಲುವೆ ಇದೆ. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ 491 ಕಿಮೀ ರಾಜಕಾಲುವೆಯನ್ನು ತೆರವು ಮಾಡಲಾಗಿತ್ತು.

ಆ ದಿನ ಸರ್ಕಾರ ಜನವರಿ 2023 ರಲ್ಲಿ 193 ಕಿಮೀ ತೆರವು ಮಾಡಲು ಕ್ರಮ ತೆಗೆದುಕೊಂಡರು. ಮೊದಲೇ ಈ ಕೆಲಸ ಮಾಡಿದ್ದರೆ ಸಮಸ್ಯೆ ಇರುತ್ತಿರಲಿಲ್ಲ. 1800 ಕೋಟಿ ರೂ. ಇದಕ್ಕೆ ವೆಚ್ಚವಾಗುತ್ತಿದೆ. 174 ಕಿಮೀ ಉಳಿದಿದೆ. ವಿಶ್ವ ಬ್ಯಾಂಕ್ ಸುಮಾರು 2000 ಕೋಟಿ ರೂಪಾಯಿ ನೀಡಲಿದೆ. 12 ಪ್ರಕರಣ ಸಿವಿಲ್ ನ್ಯಾಯಾಲಯದಲ್ಲಿವೆ. ವಕೀಲರು ಇದಕ್ಕೆ ಹಾಜರಾಗುತ್ತಿದ್ದು, ಅಗತ್ಯ ಬಿದ್ದರೆ ವಿಶೇಷ ವಕೀಲರನ್ನು ನೇಮಿಸಿ ಪ್ರಕರಣ ಇತ್ಯರ್ಥಗೊಳಿಸಲಾಗುವುದು. 12.15 ಕಿಮೀ  ನ್ಯಾಯಾಲಯದಲ್ಲಿ ಪ್ರಕರಣವಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

ವಿಳಂಬವಾಗಿರುವ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು, ಹೂಳೆತ್ತಬೇಕು, ಒಣಗಿರುವ ಕೊಂಬೆಗಳನ್ನು ಕತ್ತರಿಸಲು ಸೂಚನೆ ನೀಡಲಾಗಿದೆ. ಪಾದಚಾರಿ ಮಾರ್ಗಗಳನ್ನು ಸರಿಪಡಿಸಬೇಕು. ರಾಜಕಾಲುವೆಗೆ ಕಸ  ಹಾಕುವುದನ್ನು ತಡೆಗಟ್ಟಲು ಸೂಚನೆ ನೀಡಲಾಗಿದೆ. ಮುಂಗಾರು ಪ್ರಾರಂಭವಾಗುವ ಮುಂಚಿತವಾಗಿ ರಾಜಕಾಲುವೆಗಳ ಹೂಳು ತೆಗೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಭರ್ತಿ ಮಾಡಬೇಕು

ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು  ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್  ರಸ್ತೆಗಳಲ್ಲಿ 557 ಗುಂಡಿಗಳಿವೆ. ಈ ತಿಂಗಳಲ್ಲಿ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.

ಸಿಲ್ಕ್  ಬೋರ್ಡ್ ಬಳಿ ಮೆಟ್ರೋ ನಿರ್ಮಿಸಿರುವ ರಸ್ತೆಯನ್ನು ಅಗಲೀಕರಿಸಲು ಸೂಚನೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಡಿವಾಳ ಕೆರೆಯ ಬಳಿ ಇನ್ನೊಂದು  ಚರಂಡಿ ನಿರ್ಮಿಸಲು ಸೂಚಿಸಲಾಗಿದೆ.

ಈಜಿಪುರದಲ್ಲಿ ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಾಣ ನೆನೆಗುದಿಗೆ ಬಿದ್ದಿದ್ದು, ಗುತ್ತಿಗೆದಾರರು ವಿಳಂಬ ಮಾಡುತ್ತಿದ್ದಾರೆ. ಇವರ ಗುತ್ತಿಗೆ ರದ್ದು ಮಾಡಿ ಹೊಸಬರಿಗೆ ಕೊಡಲು ಸೂಚನೆ ನೀಡಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ ನಿರ್ವಹಣಾ ವ್ಯವಸ್ಥೆ ರೂಪಿಸಲು ಸೂಚನೆ

ಗುಂಡಿಗಳು ಬಿದ್ದ ಹಾಗೆಯೇ ಕೂಡಲೇ ದುರಸ್ತಿ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.  ಬಿಡಿಎ ನಲ್ಲಿಯೂ ಈ ರೀತಿ ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ ಎಂದರು.

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಲು ಸೂಚನೆ

ಮಳೆಗಾಲ ನಿರ್ವಹಣೆಗೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್ ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು ಎಂದು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜಕಾಲುವೆ ತೆರವು

ರಾಜಕಾಲುವೆ ಒತ್ತುವರಿಯಾಗಿದ್ದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ತೆರವು ಗೊಳಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ 400 ಕೆರೆಗಳಿದ್ದವು. ಅನೇಕ ಕೆರೆಗಳು ಹೂಳಿನಿಂದ ತುಂಬಿದೆ ಹಾಗೂ ಒತ್ತುವರಿಯಾಗಿವೆ. ಒತ್ತುವರಿ ತೆರವು ಮಾಡಿ ನೀರು ಹರಿಯಲು ಕಾಲುವೆ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಜೂನ್ ಗೆ ಮುಂಚೆಯೇ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪ್ರವಾಹ ಸಂಬಂಧಿ ಸ್ಥಳಗಳನ್ನು ಮಾತ್ರ ಪರಿಶೀಲಿಸಲು ಚುನಾವಣಾ ಆಯೋಗ ಅನುಮತಿ ನೀಡಿದೆ, ಅದರಂತೆ ಪರಿಶೀಲಿಸಲಾಗಿದೆ ಎಂದರು.

ಕೆರೆಗಳಿಂದ ತೆಗೆಯಲಾಗುವ ಹೂಳನ್ನು ಗುರುತು ಮಾಡಿರುವ ಸ್ಥಳಗಳಲ್ಲಿ (ಕ್ವಾರಿಗಳಿಗೆ) ಹಾಕಲಾಗುತ್ತಿದೆ ಎಂದರು.

ಲೋಕಸಭೆಯ ನಂತರ ಬಿಬಿಎಂಪಿ ಚುನಾವಣೆ ಬಗ್ಗೆ ಚಿಂತನೆ

ಇನ್ನು ಬಿಬಿಎಂಪಿ ಚುನಾವಣೆ ಬಗ್ಗೆ ಲೋಕಸಭೆ ಫಲಿತಾಂಶದ ನಂತರ ಚಿಂತಿಸಲಾಗುವುದು ಎಂದರು.

ಸುಳ್ಳು ಹೇಳುತ್ತಾರೆ

ಸಿಎಂ , ಡಿಸಿಎಂ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ ಎಂದು ಬಿಜೆಪಿಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,  ಆರ್. ಅಶೋಕ್ ಕೇವಲ ಸುಳ್ಳು ಹೇಳುತ್ತಾರೆ ಎಂದರು.

ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ

ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದಿಲ್ಲ  ಎಂದು ಮಾಜಿ ಮುಖ್ಯಮಂತ್ರಿ ಹೆಚ್.  ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣವನ್ನು ಮರೆಮಾಚಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

Key words: Close, potholes, delayed, works, CM Siddaramaiah

Tags :

.