HomeBreaking NewsLatest NewsPoliticsSportsCrimeCinema

ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ಗ್ಯಾರಂಟಿ ಯೋಜನೆ: ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ-ಆರ್.ಅಶೋಕ್

05:54 PM Aug 14, 2024 IST | prashanth

ಬೆಂಗಳೂರು, ಆಗಸ್ಟ್‌ 14, 2024 (www.justkannada.in): ಕಾಂಗ್ರೆಸ್‌ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್‌ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್  ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಆರ್.ಅಶೋಕ್, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್‌ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.

ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರ ಪಾಪರ್‌ ಆಗಿದೆ ಎಂದರು.

ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್‌ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್‌ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆರ್.ಅಶೋಕ್  ಆಕ್ರೋಶ ವ್ಯಕ್ತಪಡಿಸಿದರು.

ಪಾದಯಾತ್ರೆ ಯಶಸ್ವಿ

ಇತ್ತೀಚೆಗೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಉತ್ತಮವಾಗಿ ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ನನಗೆ ಕರೆ ಮಾಡಿ, ಈ ಪಾದಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿ ಎಂದು ಹೇಳಿದ್ದರು. ಪಾದಯಾತ್ರೆ ಯಶಸ್ವಿಯಾಗಿರುವುದರಿಂದಲೇ ಕಾಂಗ್ರೆಸ್‌ ನಾಯಕರು ಭಯಕ್ಕೊಳಗಾಗಿ ಹೇಳಿಕೆಗಳನ್ನು ನೀಡಿದ್ದಾರೆ. ಸರ್ಕಾರದ ಎರಡು ಹಗರಣಗಳ ವಿರುದ್ಧ ಪಾದಯಾತ್ರೆಯ ಜೊತೆಗೆ, ಕೆಲವರು ರಾಜಭವನಕ್ಕೂ ದೂರು ಸಲ್ಲಿಸಿದ್ದಾರೆ ಎಂದರು.

ಬಿಜೆಪಿಯ ಭಿನ್ನಮತಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈ ಎಲ್ಲ ಬೆಳವಣಿಗೆಯನ್ನು ಕೇಂದ್ರದ ನಾಯಕರ ಗಮನಕ್ಕೆ ತರುತ್ತೇನೆ. ಈಗಾಗಲೇ ಕೇಂದ್ರದ ನಾಯಕರು ಇದನ್ನು ಗಮನಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ರಾಜಕೀಯ ಪಕ್ಷವಲ್ಲ. ಆದ್ದರಿಂದ ರಾಜಕೀಯದ ಸಭೆ ಮಾಡುವ ಪದ್ಧತಿ ಸಂಘದಲ್ಲಿಲ್ಲ ಎಂದು ಸ್ಪಷ್ಟಪಡಿಸಿದರು.

ಬಳ್ಳಾರಿ ಪಾದಯಾತ್ರೆಗೆ ಕೇಂದ್ರದ ನಾಯಕರು ಒಪ್ಪಿಗೆ ನೀಡಿದರೆ ನಾವು ಕೂಡ ಅದರಲ್ಲಿ ಭಾಗವಹಿಸುತ್ತೇವೆ. ಸಣ್ಣ ಪುಟ್ಟ ವ್ಯತ್ಯಾಸ ಇರುವುದು ನನ್ನ ಗಮನಕ್ಕೂ ಬಂದಿದೆ. ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಮೊದಲಾದವರನ್ನು ಕೇಂದ್ರದ ನಾಯಕರು ಕರೆಸಿ ಈ ಹಿಂದೆಯೂ ಚರ್ಚೆ ಮಾಡಿದ್ದಾರೆ. ಈ ಭಿನ್ನಾಭಿಪ್ರಾಯ ಬಿಟ್ಟು ಒಟ್ಟಾಗಿ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ ಮಾಡುತ್ತೇವೆ. ಜನರು ಕೂಡ ನಮ್ಮಿಂದ ಅದನ್ನೇ ನಿರೀಕ್ಷೆ ಮಾಡುತ್ತಾರೆ ಎಂದರು.

ಸಿ.ಪಿ.ಯೋಗೇಶ್ವರ್‌ ಅವರ ಮನೆಗೆ ಹೋಗಿ ಚರ್ಚೆ ಮಾಡಲಾಗಿದೆ. ಅವರಿಗೆ ಟಿಕೆಟ್‌ ನೀಡುವ ಬಗ್ಗೆ ಎನ್‌ಡಿಎ ನಿರ್ಧಾರ ಮಾಡಬೇಕಿದ್ದು, ಆ ಬಗ್ಗೆಯೂ ಮನವರಿಕೆ ಮಾಡಿಕೊಡುತ್ತೇವೆ. ಬಂಡಾಯ ಸ್ಪರ್ಧೆ ಮಾಡುವುದು ಸರಿಯಲ್ಲ. ಏಕ ಅಭ್ಯರ್ಥಿ ಸ್ಪರ್ಧಿಸುವಂತೆ ಮಾಡಲು ಎಲ್ಲ ಪ್ರಯತ್ನ ಮಾಡುತ್ತೇವೆ ಎಂದರು.

Key words: Guarantee scheme, without, resources, R.Ashok

Tags :
Guarantee schemeR.ashokResourceswithout
Next Article