For the best experience, open
https://m.justkannada.in
on your mobile browser.

ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕ - ಸಿಎಂ ಸಿದ್ದರಾಮಯ್ಯ.

04:45 PM Feb 05, 2024 IST | prashanth
ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕ   ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 05,2024(www.justkannada.in):  ಶಕ್ತಿ ಯೋಜನೆಯಡಿ 146 ಕೋಟಿ ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿನಿಯರು ಉಚಿತವಾಗಿ ಪ್ರಯಾಣ ಮಾಡಿದ್ದು, ಮಹಿಳಾ ಸಬಲೀಕರಣಕ್ಕೆ ಶಕ್ತಿ ಯೋಜನೆ ಪೂರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 100 ಹೊಸ ವಿನ್ಯಾಸ ಕರ್ನಾಟಕ ಸಾರಿಗೆ ಬಸ್ಸುಗಳ(ಅಶ್ವಮೇಧ ಕ್ಲಾಸಿಕ್ ಪ್ರಯಾಣದ ಮರುಕಲ್ಪನೆ ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್) ಬಸ್ಸುಗಳನ್ನು ಲೋಕಾರ್ಪಣೆ ಮಾಡಿದ ನಂತರ ಮಾತನಾಡಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಈ ವರ್ಷ ಒಂದು ಸಾವಿರ ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದು ಇಂದು ನೂರು ಬಸ್ಸುಗಳ ಬಿಡುಗಡೆಯಾಗಿದೆ. ರಾಜ್ಯದ ಜನರಿಗೆ 4 ಕಾರ್ಪೋರೇಷನ್‍ ಗಳು ಬಸ್ಸುಗಳ ಸೇವೆಯನ್ನು ಒದಗಿಸುತ್ತಿದೆ.  ನಾಲ್ಕು ವರ್ಷಗಳಿಂದ ಹೊಸ ಬಸ್ಸುಗಳನ್ನು ಸೇರ್ಪಡೆ ಮಾಡಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕೂಡ ಕೆಲವು 3800 ಬಸ್ಸುಗಳನ್ನು ಸ್ಥಗಿತಗೊಳಿಸಲಾಗಿತ್ತು. ನಾವು ಅಧಿಕಾರಕ್ಕೆ ಬಂದ ನಂತರ ಸಂಸ್ಥೆಗೆ 5800 ಬಸ್ಸುಗಳನ್ನು ಸೇರ್ಪಡೆ ಮಾಡುತ್ತಿದ್ದೇವೆ.  ಈ ರಾಜ್ಯದ ಜನರಿಗೆ ಸುರಕ್ಷಿತ ಮತ್ತು ಸರಾಗ ಪ್ರಯಾಣ ಮಾಡಲು ಅಗತ್ಯ ಅನುಕೂಲಗಳನ್ನು ಮಾಡಿಕೊಡಲಿದೆ ಎಂದರು.

ಸಿಬ್ಬಂದಿಗೆ ವಿಮಾ ಸೌಲಭ್ಯ:

ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯವನ್ನು 1 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಕರ್ತವ್ಯದ ವೇಳೆ ಮೃತಪಡುವ ಸಿಬ್ಬಂದಿಗಳಿಗೆ ಪರಿಹಾರ ಮೊತ್ತವನ್ನು 3 ಲಕ್ಷ ರೂ.ಗಳಿಂದ 10 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಚುನಾವಣಾ ಪೂರ್ವದ ಭರವಸೆ ಈಡೇರಿಸಲಾಗಿದೆ:

ಚುನಾವಣಾ ಪೂರ್ವದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಕ.ರ.ಸಾ.ಸಂ ಮತ್ತು ಇತರೆ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಹೇಳಿದ್ದೆವು. ಬೆಲೆಯೇರಿಕೆ, ಹಣದುಬ್ಬರು, ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿರುವ ಪರಿಸ್ಥಿತಿಯಲ್ಲಿ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚು ಮಾಡಿದ್ದೇವೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕ.ರ.ಸಾ.ಸಂ ಅಧ್ಯಕ್ಷ ಗೋಪಿ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಮೊದಲಾದವರು ಉಪಸ್ಥಿತರಿದ್ದರು.

Key words: Shakti Yojana -Supplement - Women Empowerment - CM -Siddaramaiah.

Tags :

.