HomeBreaking NewsLatest NewsPoliticsSportsCrimeCinema

ಸಂಸತ್ ಭವನದ ಮೇಲೆ ಇಂದಿನ ದಾಳಿ ಖಂಡನೀಯ: ಘಟನೆ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ಸತ್ಯ ಹೊರತನ್ನಿ-ಸಿಎಂ ಸಿದ್ದರಾಮಯ್ಯ ಆಗ್ರಹ.

06:18 PM Dec 13, 2023 IST | JK Desk

ಬೆಳಗಾವಿ,ಡಿಸೆಂಬರ್,13,2023(www.justkannada.in): ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಘಟನೆ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ಸತ್ಯ ಹೊರತರಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ ಎಂದಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಸಂಸದ ಪ್ರತಾಪ ಸಿಂಹ ಕಚೇರಿಯಿಂದ ಪಾಸ್.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದದಾರೆ.
ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Key words: Today- attack - Parliament House -condemnable: - CM Siddaramaiah

Next Article